
ಪಾಲಂಗಾಲ, ಜ.15: (ಕರಿನೆರವಂಡ ಡ್ಯಾನಿ ಕುಶಾಲಪ್ಪ) ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಪ್ರಶಸ್ತಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಈ ದತ್ತಿಯನ್ನು ಗೌರಮ್ಮರವರ ಪುತ್ರ ಬಿ.ಜಿ.ವಸಂತ ರವರು ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 20 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2024-25ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿ, 15 ಲೇಖಕಿಯರು ತಮ್ಮ ಕೃತಿಗಳನ್ನು ಪ್ರಶಸ್ತಿಗಾಗಿ ಮಂಡಿಸಿದ್ದರು.
ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರನ್ನಾಗಿಸಿ ಅವರು ಎಲ್ಲ ಪುಸ್ತಕಗಳನ್ನು ಪರಮಾರ್ಶಿಸಿ ಕೂಡಕಂಡಿ ಓಂಶ್ರೀ ದಯಾನಂದ ಬರೆದ – ಪುಟಾಣಿ ರೈಲು – ಅಂದದ ಕಥೆಗಳ ಲೋಕದಲ್ಲೊಂದು ಸುಂದರ ಪಯಣ ಕಥಾ ಸಂಕಲನಕ್ಕೆ ಪ್ರಶಸ್ತಿ ಲಭ್ಯವಾಗಿದೆ. ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.
ಇವರು ಭಾಗಮಂಡಲ ನಾಡು ತಾವೂರು ಗ್ರಾಮದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ಅಮೆ ಮಾದಪ್ಪ ಮತ್ತು ಶ್ರೀಮತಿ ವನಜ ದಂಪತಿ ಮಗಳಾಗಿ ಕೂಡಕಂಡಿ ಚಂದ್ರಹಾಸ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರ, ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಯಾನಂದ ಕೂಡಕಂಡಿಯವರ ಪತ್ನಿ.