ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಮಂಡಿಸಿರುವ ಈ ವರ್ಷದ ಆಯವ್ಯಯವು ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಮಂಡೆಪಂಡ ಸುಜಾಕುಶಾಲಪ್ಪ ಹೇಳಿದ್ದಾರೆ. ಪತ್ರಕಾ ಹೇಳಿಕೆ ನೀಡಿರುವ ಅವರು, ರೈತರು, ಯುವಕರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಸಮಸ್ಯೆಗಳ ಪರಿಹಾರಕ್ಕೆ ಸ್ಪಷ್ಟವಾದ ಯೋಜನೆಗಳು ಈ ಬಜೆಟ್ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ರಾಜ್ಯದ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ, ಉದ್ಯೋಗ ಸೃಷ್ಟಿ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಈ ಬಜೆಟ್ನಲ್ಲಿ ಸಾಕಷ್ಟು ಆದ್ಯತೆ ನೀಡಲಾಗಿಲ್ಲ. ಕೇವಲ ಘೋಷಣೆಗಳ ಮೂಲಕ ಜನರನ್ನು ತಪ್ಪುದಾರಿಗೆಳೆಯುವ ಪ್ರಯತ್ನವೇ ಈ ಆಯವ್ಯಯದಲ್ಲಿ ಗೋಚರಿಸುತ್ತದೆ. 2025-26 ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರೂ 50.00 ಕೋಟಿ ಗಳ ಅನುದಾನವನ್ನು ಘೋಷಣೆ ಮಾಡಿ ಅದರಲ್ಲಿ ಕೊಡವ ಹೆರಿಟೇಜ್ ಕಾಮಗಾರಿಯನ್ನು ರೂ 5.00 ಕೋಟಿ ಗಳಲ್ಲಿ ಮುಂದುವರಿಸುವ ಭರವಸೆ ನೀಡಿ ಬಿಡಿಗಾಸು ಬಿಡುಗಡೆಯಾಗದೆ ಇರುವುದು ಇದಕ್ಕೆ ಸ್ಪಷ್ಟ ಉದಾಹರಣೆ. ಈ ವರ್ಷದ ಆಯವ್ಯಯದಲ್ಲಿ ಕೊಡಗು ಜಿಲ್ಲೆಯ ಪ್ರವಾಸೋದ್ಯಮವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ರಾಜ್ಯದ ಸಾಲಭಾರ ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿ, ಸರ್ಕಾರ ಜವಾಬ್ದಾರಿಯುತ ಆರ್ಥಿಕ ನಿರ್ವಹಣೆಯನ್ನು ತೋರಿಸಬೇಕಿತ್ತು. ಆದರೆ ಈ ಬಜೆಟ್ನಲ್ಲಿ ದೂರದೃಷ್ಟಿಯ ಕೊರತೆ ಸ್ಪಷ್ಟವಾಗಿ ಕಾಣುತ್ತಿದೆ. ಒಟ್ಟಾರೆಯಾಗಿ ನಾಗರಿಕರನ್ನು ಸಾಲದ ಕೂಪಕ್ಕೆ ತಳ್ಳಲಾಗಿದೆ ಎಂದಿದ್ದಾರೆ.




