
ಪೊನ್ನಂಪೇಟೆ,ಜೂ.02 (Nadubade News): ಪೊನ್ನಂಪೇಟೆಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆಗಿರುವ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಬಾರಿಯ ಮಳೆಗಾಲವನ್ನು ಎದುರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಮಾಡಿಕೊಂಡಿರುವ ತಯಾರಿ ಬಗ್ಗೆ ವಿವರಣೆ ಕೇಳಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಈ ಬಾರಿಯ ಮಳೆಗಾಲವನ್ನು ಎದುರಿಸಲು ಎಲ್ಲರೂ ಸಜ್ಜಾಗಿರುವಂತೆ ಸೂಚಿಸಿದ ಮಾನ್ಯ ಶಾಸಕರು, ಸಾರ್ವಜನಿಕರ ಯಾವುದೇ ದೂರು ಬಂದಲ್ಲಿ ಅದನ್ನು ಕೂಡಲೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದರು. ಟಾಸ್ಕ್ ಫೋರ್ಸ್ ನ ಮುಖ್ಯಸ್ಥರು ನಿರಂತರವಾಗಿ ಶಾಸಕರ ಸಂಪರ್ಕದಲ್ಲಿದ್ದು ಕಾಲಕಾಲಕ್ಕೆ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ವಿರಾಜಪೇಟೆಯ ಅನಂತ ಶಂಕರ್, ಪೊನ್ನಂಪೇಟೆಯ ಮೋಹನ್, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಕಾರ್ಯನಿರ್ವಣಾಧಿಕಾರಿಗಳಾದ ಅಪ್ಪಣ್ಣ ,ಗ್ಯಾರೆಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.