
ಮಡಿಕೇರಿ , ಮೇ.30 ( Nadubade News): ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಳೆಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು.
ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆ ಮತ್ತು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕುಟುಂಬಗಳ ಸ್ಥಳಾಂತರ ಜೊತೆಗೆ ಶಾಶ್ವತ ಪರಿಹಾರ ಕಲ್ಪಿಸುವಂತಾಗಬೇಕು ಎಂದು ನಿರ್ದೇಶನ ನೀಡಿದರು. ಪ್ರವಾಹ ಪೀಡಿತ ಪ್ರದೇಶದ ಕುಟುಂಬಗಳಿಗೆ ಪ್ರತೀ ವರ್ಷ ನೋಟೀಸು ನೀಡುವುದು ಸರಿಯಲ್ಲ. ಆದ್ದರಿಂದ ಪ್ರವಾಹ ಪೀಡಿತ ಕುಟುಂಬಗಳಿಗೆ ಹತ್ತಿರದಲ್ಲಿ ನಿವೇಶನ ಒದಗಿಸಿ ಮನೆ ನಿರ್ಮಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಕುಟುಂಬಗಳ ಪಟ್ಟಿ ಮಾಡುವಂತೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ಬಾರಿ ಮುಂಗಾರು ಮೇ ತಿಂಗಳಲ್ಲಿಯೇ ಆರಂಭವಾಗಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಆದ್ದರಿಂದ ಕಂದಾಯ, ಪೊಲೀಸ್ ಲೋಕೋಪಯೋಗಿ, ಪಂಚಾಯತ್ ರಾಜ್ ಅರಣ್ಯ, ಸೆಸ್ಕ್ ಅಗ್ನಿಶಾಮಕ ಹೀಗೆ ಎಲ್ಲಾ ಹಂತದ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಡಾ.ಮಂತರ್ ಗೌಡ ಅವರು ತಾಕೀತು ಮಾಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಎಷ್ಟು ಮನೆಗಳಿಗೆ ಸ್ಥಳಾಂತರಕ್ಕೆ ಕ್ರಮವಹಿಸಿರುವ ಬಗ್ಗೆ, ಗ್ರಾ.ಪಂ.ವಾರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ತಾ.ಪಂ.ಇಒ ಶೇಖರ್ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಹೊದ್ದೂರು, ಮೂರ್ನಾಡು, ಕಡಗದಾಳು, ಹಾಗೆಯೇ ಸೂಕ್ಷ್ಮ ಪ್ರದೇಶಗಳಾದ ಮಕ್ಕಂದೂರು, ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ಸುಮಾರು 342 ಕುಟುಂಬಗಳಿಗೆ ಎಚ್ಛರಿಕಾ ನೋಟೀಸು ನೀಡಲಾಗಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ಮಾತನಾಡಿ ಪ್ರವಾಹ ಪೀಡಿತ ಹಾಗೂ ಸೂಕ್ಷ್ಮ ಪ್ರದೇಶದಲ್ಲಿನ ಜನರು ಆಯಾಯ ಪ್ರದೇಶದಲ್ಲಿ ಹೊಂದಿಕೊಂಡು ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಹತ್ತಿರದ ಸಂಬಂಧಿಕರ ಮನೆಗೆ ಅಥವಾ ಕಾಳಜಿ ಕೇಂದ್ರಕ್ಕೆ ತೆರಳಲಿದಾರ ಆ ನಿಟಿ ನಲ್ಲಿ ಮುನೆ ಚರ ವಹಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಯಾವುದೇ ರೀತಿಯ ಅವಘಡಗಳು ಸಂಭವಿಸುವ ಮೊದಲು ಅಧಿಕಾರಿಗಳು ಎಚ್ಚರ ವಹಿಸುವುದು ಅಗತ್ಯ. ಆದ್ದರಿಂದ ಆಡಳಿತ ವ್ಯವಸ್ಥೆ ನುಣುಚಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಮಳ ಮಾಹಿತಿ ನೀಡುವುದರ ಜೊತೆಗೆ ಅಧಿಕಾರಿಗಳು ಸದಾ ಎಚ್ಚರವಹಿಸಬೇಕು ಎಂದು ಶಾಸಕರು ಸಲಹೆ ಮಾಡಿದರು. ನದಿ ಪಾತ್ರದಲ್ಲಿನ ಕುಟುಂಬಗಳು ಹಾಗೂ ಸೂಕ್ಷ್ಮ ಪ್ರದೇಶದಲ್ಲಿನ ಜನರ ಸುರಕ್ಷತೆ ಮತ್ತು ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಆದ್ದರಿಂದ ಹಳೇ ಮರಗಳನ್ನು ತೆರವುಗೊಳಿಸಬೇಕು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಶಾಸಕರು ನಿರ್ದೇಶನ ನೀಡಿದರು. ರಸ್ತೆ ಬದಿ ಕಾಡು ಕಡಿಯುವುದು, ಹಳೇ ಮರಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಗಮನಕ್ಕೆ ತರುವುದು, ಚರಂಡಿ ಸರಿಪಡಿಸುವುದು, ಮತ್ತಿತರ ಕೆಲಸವನ್ನು ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗವು ನಿರ್ವಹಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರ ತೆರೆಯಬೇಕು, ಕಾಳಜಿ ಕೇಂದ್ರದಲ್ಲಿ ಕುಡಿಯುವ ನೀರು, ಶೌಚಾಲಯ, ಅಡುಗೆ ಮನೆ ಇರಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು ಎಂದು ಶಾಸಕರು ಸೂಚಿಸಿದರು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯ ಮುಂದಿನ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮತ್ತಷ್ಟು ಹೆಚ್ಚಿನ ಎಚ್ಚರವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ತ್ರೈಮಾಸಿಕ ಕೆಡಿಪಿ ಸದಸ್ಯರಾದ ಶ್ಯಾಮ್ ಸುಬ್ಬಯ್ಯ ಅವರು ಕೊಡಗು ಜಿಲ್ಲೆಯ ಮಕ್ಕಂದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗುತ್ತದೆ. ಹಲವು ಕುಟುಂಬಗಳು ಏಳು ವರ್ಷದಿಂದ ಮನೆ ಕೇಳುತ್ತಿದ್ದಾರೆ. ಇನ್ನೂ ಸಹ ಮನೆ ಒದಗಿಸಿಲ್ಲ ಎಂದು ಶಾಸಕರ ಗಮನಕ್ಕೆ ತಂದರು. ಮಕ್ಕಂದೂರು ಗ್ರಾ. ಪಂ.ವ್ಯಾಪ್ತಿಯಲ್ಲಿ ಪ್ರತೀ ವರ್ಷ ಮಳೆಯಿಂದ ಹೆಚ್ಚಿನ ಹಾನಿಯಾಗುತ್ತಿದೆ. ಈ ಬಗ್ಗೆ ಗಮನಹರಿಸಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಉಪ ವಿಭಾಗಾಧಿಕಾರಿ ಅವರ ಜೊತೆ ಚರ್ಚಿಸಿ ಮನೆ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು|ತಿಳಿಸಿದರು.
ವಿವಿಧ ಇಲಾಖೆಗಳು ಹಳೇ ಮರಗಳನ್ನು ತೆರವುಗೊಳಿಸಲು ಅನುಮತಿ ಕೇಳಿದ್ದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕೂಡಲೇ ಅನುಮತಿ ನೀಡುವಂತಾಗಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ ಅವರು ಅಪಾಯ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು ಎಂದು ಸಭೆಯ ಗಮನಕ್ಕೆ ತಂದರು. ಈ ವಾರ ಬಿರುಗಾಳಿ ಮತ್ತು ಹೆಚ್ಚಿನ ಮಳೆಯಿಂದಾಗಿ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಇದನ್ನು ಕೂಡಲೇ ಸರಿಪಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಯಾವುದೇ ಅವಘಡ ಸಂಭವಿಸಿದಂತೆ ಅಗತ್ಯ ಮುನ್ನೆಚ್ಚರವಹಿಸಬೇಕು ಎಂದು ಸೆಸ್ಕ್ ಎಂಜಿನಿಯರ್ಗಳಿಗೆ ಶಾಸಕರು ನಿರ್ದೇಶನ ನೀಡಿದರು.
ಗ್ರಾ.ಪಂ.ಪಿಡಿಒಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಪಂಚಾಯತ್ ರಾಜ್ ಎಂಜಿನಿಯರ್ ಭಾಸ್ಕರ್, ಸೆಸ್ ಎಂಜಿನಿಯರ್ ರಾಮಚಂದ್ರ, ವಿಜಯಕುಮಾರ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಗಿರೀಶ್, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.