ಭಾಗಮಂಡಲ, ಮೇ.11 (Nadubade News): ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ, ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ ಸಂಪರ್ಕಿಸುವ ಮಡಿಕೇರಿ ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು, ಸುಮಾರು ₹ 4 ಕೋಟಿ ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ತನಕದ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು. ದಿನವೊಂದಕ್ಕೆ ಸಾವಿರಾರು ಭಕ್ತಾದಿಗಳು ಹಾಗೂ ಸಾರ್ವಜನಿಕರು ಓಡಾಡುವ ಈ ರಸ್ತೆಯು, ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದ್ದು, ಈ ರಸ್ತೆ ಅಭಿವೃದ್ಧಿಯಾದ ಬಳಿಕ ಪ್ರಯಾಣಿಕರಿಗೆ ಅನುಕೂಲವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ರಾಜ್ಯದಿಂದ ಹಾಗೂ ಹೊರ ರಾಜ್ಯದಿಂದ ಬರುವ ಸಾವಿರಾರು ಭಕ್ತರಿಗೆ ಈ ರಸ್ತೆಯು ಅನುಕೂಲವಾಗಲಿದ್ದು ಗುತ್ತಿಗೆದಾರರು ರಸ್ತೆ ನಿರ್ಮಾಣ ಮಾಡುವ ಸಂದರ್ಭ ವಾಹನ ಸವಾರರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ರಸ್ತೆಯನ್ನು ನಿರ್ಮಿಸಬೇಕೆಂದು ಸಲಹೆ ನೀಡಿದರು. ದಿನಂಪ್ರತಿ ಸಾವಿರಾರು ಜನರು ಓಡಾಡುವ ಈ ರಸ್ತೆಯ ಕಾಮಗಾರಿ ಅತಿ ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಗುತ್ತಿಗೆದಾರರಿಗೆ ಹೇಳಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಪ್ರಮುಖರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.