Site icon nadubadenews.com

ಹತ್ತನೇ ತರಗತಿ ಪರೀಕ್ಷೆ-2 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ…

Spread the love

ಮಡಿಕೇರಿ ಮೇ.24(Nadubade News): ಕೊಡಗು ಜಿಲ್ಲೆಯಲ್ಲಿ ಮೇ, 26 ರಿಂದ 31 ರವರೆಗೆ ನಡೆಯುವ “2025ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2” ಅನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿರುತ್ತೇನೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದಾಗಿದೆ. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು  ಬಳಸುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಸದರಿ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

Exit mobile version